ಶಿವಮೊಗ್ಗ: ಪತ್ರಿಕೆ ಹಾಗೂ ವನ್ಯಜೀವಿ ಛಾಯಾಗ್ರಾಹಕರಾದ ಶಿವಮೊಗ್ಗ ನಾಗರಾಜ್ ಅವರು ಶಿಕಾರಿಪುರದಲ್ಲಿ ಸೆರೆಹಿಡಿದ ‘ಹೋರಿ ಹಬ್ಬ’ದ ಛಾಯಾಚಿತ್ರಕ್ಕೆ ‘ಸ್ಪಾಟ್ ನ್ಯೂಸ್’ ವಿಭಾಗದಲ್ಲಿ ಕನ್ಸೋಲೇಶನ್ ಅವಾರ್ಡ್ ಲಭಿಸಿದೆ.

ಇದೇ ಛಾಯಾಚಿತ್ರವು ಇತ್ತೀಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದ್ದು, ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ ನಡೆದ ಎರಡು ದಿನಗಳ ಛಾಯಾಚಿತ್ರ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು.
ಶಿವಮೊಗ್ಗ ನಾಗರಾಜ್ ಅವರು ಸೆರೆಹಿಡಿದಿರುವ ಹಲವು ಅಪರೂಪದ ಛಾಯಾಚಿತ್ರಗಳು ದೇಶ-ವಿದೇಶಗಳಲ್ಲಿ ಪ್ರದರ್ಶನಗೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳ ಜೊತೆಗೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗಳಿಸಿವೆ. ಈ ಮೂಲಕ ಶಿವಮೊಗ್ಗ ಜಿಲ್ಲೆ ಹಾಗೂ ಕರ್ನಾಟಕಕ್ಕೆ ವಿಶೇಷ ಗೌರವ ತಂದುಕೊಟ್ಟಿದ್ದಾರೆ.
ಪ್ರಕೃತಿ, ವನ್ಯಜೀವಿ ಹಾಗೂ ಗ್ರಾಮೀಣ ಬದುಕಿನ ವೈವಿಧ್ಯಮಯ ಚಿತ್ರಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿಯುವ ನಾಗರಾಜ್ ಅವರು, ಪ್ರತಿವರ್ಷ ತಮ್ಮ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸುವ ಮೂಲಕ ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
