ಶಿವಮೊಗ್ಗ : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಶಾಲಾ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹಾಗೂ 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಕುರಿತು ಹಲವು ಮುಖ್ಯ ನಿರ್ಧಾರಗಳನ್ನು ಹಂಚಿಕೊಂಡರು.
ರಾಜ್ಯದ ಬಹುತೇಕ ಶಾಲೆಗಳಿಗೆ ಪಠ್ಯಪುಸ್ತಕಗಳ ಪೂರೈಕೆ ಪೂರ್ಣಗೊಂಡಿದೆ. ಪ್ರವೇಶಾತಿ ಹೆಚ್ಚು-ಕಡಿಮೆಯಾದ ಕಡೆಗಳಲ್ಲಿ ತಕ್ಷಣವೇ ಪಠ್ಯಪುಸ್ತಕ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ 1ನೇ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ.
ಸ್ಥಳೀಯವಾಗಿ ಕಳಪೆ ದರ್ಜೆಯ ಶೂಗಳನ್ನು ನೀಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ರಾಜ್ಯಮಟ್ಟದಲ್ಲೇ ಟೆಂಡರ್ ಕರೆಯಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಯಲ್ಲಿ ವ್ಯತ್ಯಾಸವಿದ್ದರೆ ತಕ್ಷಣವೇ ಬದಲಾಯಿಸಿಕೊಡಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
ಶಾಲಾ ಸೌಲಭ್ಯಗಳಲ್ಲಿ ಕಳಪೆತನ ಅಥವಾ ಮೋಸ ಎಸಗುವ ಟೆಂಡರ್ದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. 100% ಉಚಿತ ವಿದ್ಯುತ್, ಮಧ್ಯಾಹ್ನದ ಊಟ, ಹಾಲು, ಮೊಟ್ಟೆ, ಶೂ ಹಾಗೂ ಪಠ್ಯಪುಸ್ತಕ ತಲುಪಿಸಲು ಇಲಾಖೆ ಬದ್ಧವಾಗಿದೆ.
800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸುವ ಕುರಿತು ಜೂನ್ 1ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸುವುದಾಗಿ ತಿಳಿಸಿದ್ದರು. ಅಲೋಕೇಷನ್ ಮುಂದಿನ ವರ್ಷವಾದರೂ ಈ ವರ್ಷವೇ ಯೋಜನೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದರು.
