ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ ಸಂಭವಿಸಿದೆ.
ಮೃತರು ಬೆಂಗಳೂರಿನ ಯೂನಿವರ್ಸಲ್ ಕಾಲೇಜಿನ ಮೂರನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು. ವಿದ್ಯಾರ್ಥಿಗಳು ಆಗಸ್ಟ್ 16ರಂದು ಪ್ರವಾಸಕ್ಕಾಗಿ ಗೋವಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಶುಕ್ರವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ 20 ಜನರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.l
