ಶಿವಮೊಗ್ಗ: ಬಿಡದಿ ರೈತರ ಹೋರಾಟ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ರೈತರು ಕಳೆದ 550 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ರೈತರ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.
ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಬಿಡದಿ ಟೌನ್ಶಿಪ್ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗೆ ಕಾನೂನಿನ ತಳಹದಿ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದರೂ ಸರ್ಕಾರ ಭೂಸ್ವಾಧೀನವನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ದೂರಿದರು.
ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿ ಒಂದೂವರೆ ತಿಂಗಳು ಕಳೆದರೂ ಈವರೆಗೆ ಸರ್ಕಾರಿ ಆದೇಶ ಹೊರಬಿದ್ದಿಲ್ಲ. ಇದು ಅನಗತ್ಯ ವಿಳಂಬವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಫಲವತ್ತಾದ ನೀರಾವರಿ ಕೃಷಿ ಭೂಮಿಯನ್ನು ರಕ್ಷಿಸುವುದು ಹಾಗೂ ಭೂಸ್ವಾಧೀನದ ವಿರುದ್ಧ ಹೋರಾಟ ತೀವ್ರಗೊಳಿಸುವ ಉದ್ದೇಶದಿಂದ ವಿಧಾನಸೌಧ ಚಲೋ ಆಯೋಜಿಸಲಾಗಿದೆ. ರಾಜ್ಯದ ನೂರಾರು ರೈತರು, ಕೂಲಿ ಕಾರ್ಮಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಬಸವರಾಜಪ್ಪ ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಶೇಷಪ್ಪ, ಹಿಟ್ಟೂರು ರಾಜು, ಹನುಮಮ್ಮ, ಕೆ.ಎಲ್. ಅಶೋಕ್, ಎಚ್.ಎಂ. ಜ್ಞಾನೇಶ್, ಇ.ಬಿ. ಜಗದೀಶ್ ಹಾಗೂ ಕೆ. ರಾಘವೇಂದ್ರ ಉಪಸ್ಥಿತರಿದ್ದರು.
