ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಶಿವಮೊಗ್ಗ ಜಿಲ್ಲೆಯಿಂದ 1,200ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.
ಪೂರ್ವನಿಗದಿಯಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್.ಕೆ. ಅವರ ನೇತೃತ್ವದಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಮೆಟ್ರಿಯಿಂದ ಹಳೇದರೋಜಿವರೆಗೆ ನಡೆದ ಪಾದಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಂಡರು. ಈ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಕಾರ್ಯಕರ್ತರು ಸುಮಾರು 10 ಕಿ.ಮೀ. ಹೆಜ್ಜೆ ಹಾಕಿದರು.

ಪಾದಯಾತ್ರೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್.ಕೆ., ಶಾಸಕರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ), ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಭಾರತೀ ಶೆಟ್ಟಿ, ಮಾಜಿ ಶಾಸಕರಾದ ಅಶೋಕ್ ನಾಯ್ಕ್ ಹಾಗೂ ಹರತಾಳು ಹಾಲಪ್ಪ ಸೇರಿದಂತೆ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಹರಿಕೃಷ್ಣ, ಮಾಲತೇಶ್, ಶಿವಮೊಗ್ಗ ನಗರಾಧ್ಯಕ್ಷ ಮೋಹನ್ ರೆಡ್ಡಿ ಸೇರಿದಂತೆ ವಿವಿಧ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾದಯಾತ್ರೆಗೆ ಸಾಥ್ ನೀಡಿದರು.
ಏಳನೇ ದಿನದ ಪಾದಯಾತ್ರೆ ಕಂಪ್ಲಿಯಿಂದ ಹಳೇದರೋಜಿವರೆಗೆ ಸುಮಾರು 20 ಕಿ.ಮೀ. ಸಾಗಿತು. ಮಾರ್ಗದುದ್ದಕ್ಕೂ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಬಿ.ವೈ. ವಿಜಯೇಂದ್ರ ಹಾಗೂ ಬಿ.ವೈ. ರಾಘವೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು, ರೈತರ ಸಮಸ್ಯೆಗಳು, ಯುವಕರ ಉದ್ಯೋಗ ಹಾಗೂ ರಾಜ್ಯದ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾಪಿಸಿದರು.
ಸೆ.1ರಂದು ಆರಂಭಗೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಸೆ.10ರಂದು ಬಳ್ಳಾರಿಯಲ್ಲಿ ಬೃಹತ್ ಸಮಾರೋಪ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ.
