ಶಿವಮೊಗ್ಗ : ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಮತ್ತು ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆಗಳು ಸಹಕಾರಿಯಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು.
ನೆಹರೂ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಪ್ರಿವೇಲ್ ಆಂಗ್ಲ ಮಾಧ್ಯಮ ಶಾಲೆ, ಊರುಗಡೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 14 ವರ್ಷ ವಯೋಮಿತಿಯೊಳಗಿನ ಬಾಲಕ–ಬಾಲಕಿಯರ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಟದಲ್ಲಿ ಸೋಲು–ಗೆಲುವು ಸಾಮಾನ್ಯ. ಆದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳುವುದರ ಜೊತೆಗೆ ಶಿಸ್ತು ಮತ್ತು ಸಾಮರಸ್ಯವನ್ನು ಕಲಿಯಬಹುದು ಎಂದು ಅವರು ತಿಳಿಸಿದರು.
ಮೊಬೈಲ್, ಟಿವಿಯಿಂದ ಕ್ರೀಡೆಗೆ ಆದ್ಯತೆ ಕಡಿಮೆಯಾಗುತ್ತಿದೆ
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಸವಿತಾ ಕೆ.ವಿ. ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ನೇಮಾನ್ ಮೆಗ್ ಮಾತನಾಡಿ, ಇಂದಿನ ದಿನಗಳಲ್ಲಿ ಮೊಬೈಲ್ ಹಾಗೂ ಟಿವಿಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ನೀಡುವ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ಓದಿಗೆ ನೀಡುವಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಿವೇಲ್ ಸಂಸ್ಥೆಯ ಉಪಾಧ್ಯಕ್ಷ ಅಜೀಜ್ ಉಲ್ಲಾ ಖಾನ್, ಖಜಾಂಚಿ ಶಿರಾಜ್ ಅಹಮದ್ ಖಾನ್, ಸಹ ಕಾರ್ಯದರ್ಶಿ ಮೊಹಮದ್ ಗೌಸ್, ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಬಿ.ಹೆಚ್. ನಿರಂಜನಮೂರ್ತಿ, ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ.ಹ. ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ. ಮಠಪತಿ, ತೇಜಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಅಲಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಅನುದಾನ ರಹಿತ ವಿವಿಧ ಶಾಲೆಗಳ 60 ಮಂದಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸಂಸ್ಥೆಯ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಪಥಸಂಚಲನದಲ್ಲಿ ಬಾಲಕ–ಬಾಲಕಿಯರ ತಂಡಗಳು ಭಾಗವಹಿಸಿದ್ದು, ಉತ್ತಮ ಪ್ರದರ್ಶನ ನೀಡಿದ ಐದು ತಂಡಗಳಿಗೆ ಟ್ರೋಫಿ ನೀಡಿ ಗೌರವಿಸಲಾಯಿತು.
